Friday, May 9, 2025
Homeಜಿಲ್ಲೆತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ಪ್ರತಿಭಟನೆ

ಮಂಡ್ಯ :- ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಹರಿಸಬೇಕೆಂದು ಸೂಚಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸೇನೆ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇನೆಯ ಕಾರ್ಯಕರ್ತರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕಾವೇರಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ,ಕೇಂದ್ರ -ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ,ಸಚಿವರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸೇನೆಯ ಜಿಲ್ಲಾಧ್ಯಕ್ಷ ಹೆಚ್ ಸಿ ಮಂಜುನಾಥ್ ಮಾತನಾಡಿ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆಯಂತೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಬದಲಾಗಿ ಎಂಟು ಸಾವಿರ ಕ್ಯೂಸೆಕ್ ನೀರು ಬಿಡಲಾಗುವುದು ಎಂದು ಸರ್ವ ಪಕ್ಷಗಳ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಕಾವೇರಿ ಕೊಳ್ಳದ ಜಲಾಶಯಗಳಿಂದ ಇಪ್ಪತ್ತು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ ಎಂದರು.
ಸಮಿತಿಯ ಸೂಚನೆ ಗಿಂತ ಹೆಚ್ಚಿನ ಪ್ರಮಾಣದಲ್ಲಿ ತಮಿಳುನಾಡಿಗೆ ನೀರು ಬಿಡುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡಲಾಗಿದೆ, ರಾಜ್ಯ ಸರ್ಕಾರ ಈ ಕೂಡಲೇ ಶ್ವೇತಪತ್ರ ಹೊರಡಿಸಬೇಕು, ಕಳೆದ ವರ್ಷ ನೀರಿಲ್ಲದೆ ರೈತರು ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ, ಸ್ವಲ್ಪ ಪ್ರಮಾಣದಲ್ಲಿ ಕೆ ಆರ್ ಎಸ್ ಗೆ ನೀರು ಬಂದಿದೆ ಇಲ್ಲಿನ ಕೆರೆ ಕಟ್ಟೆಗಳು ತುಂಬಿಲ್ಲ, ಆದರೂ ಕೂಡ ನೆರೆ ರಾಜ್ಯಕ್ಕೆ ನೀರು ಬಿಡುವ ಮೂಲಕ ಜಲಾಶಯ ಖಾಲಿ ಮಾಡಲು ಮುಂದಾಗಿದೆ, ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಿಂದ 20,000 ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ, ಈ ಕೂಡಲೇ ನೀರು ನಿಲ್ಲಿಸಿ ಇಲ್ಲಿನ ರೈತರು ಎರಡು ಬೆಳೆ ಬೆಳೆಯಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ವಿಧಾನ ಮಂಡಲದ ಅಧಿವೇಶನ ಆರಂಭಗೊಂಡಿದ್ದು ಜಿಲ್ಲೆಯ ಶಾಸಕರು ಸದನದಲ್ಲಿ ದನಿ ಎತ್ತಬೇಕು, ಕಳೆದ ವರ್ಷದಂತೆ ಮೌನವಹಿಸಿ ಕೂರಬಾರದು, ಕಾವೇರಿ ಕೊಳ್ಳ ಜಿಲ್ಲೆಗಳ ಎಲ್ಲಾ ಶಾಸಕರು ದನಿಗೂಡಿಸಿ ರೈತರ ಹಿತ ಕಾಪಾಡಲು ಮುಂದಾಗಬೇಕು ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಪಾಡುವುದು ಚುನಾಯಿತ ಜನಪ್ರತಿನಿಧಿಗಳ ಹೊಣೆಗಾರಿಕೆ ಎಂಬುದನ್ನು ಮರೆಯಬಾರದು ಇಲ್ಲದಿದ್ದರೆ ಜಿಲ್ಲೆಗೆ ಬಂದಾಗ ಶಾಸಕರನ್ನು ತಡೆಯಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದಿಂದ ಚುನಾಯಿತರಾಗಿರುವ ಸಂಸದರು ಕಾವೇರಿ ವಿಚಾರದಲ್ಲಿ ಬಾಯಿ ಬಿಟ್ಟಿಲ್ಲ ಈಗಲಾದರೂ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರಕ್ಕೆ ಕಾವೇರಿ ಕೊಳ್ಳ ಪ್ರದೇಶದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಲು ಮುಂದಾಗಬೇಕು,ಎಲ್ಲಾ ಸಂಸದರು ಪತ್ರ ಬರೆದು ಪರಿಸ್ಥಿತಿಯನ್ನು ವಿವರಿಸಬೇಕು, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಿ ಒಮ್ಮತದ ತೀರ್ಮಾನ ಕೈಗೊಂಡು ಕಾವೇರಿ ನೀರು ಉಳಿಸುವ ಜೊತೆಗೆ ರೈತರ ಹಿತ ಕಾಪಾಡಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ರೈತರಿಗೆ ಬೆಳೆ ನಷ್ಟ ಪರಿಹಾರ ಪಾವತಿಸದೆ ಸರ್ಕಾರ ನಿರ್ಲಕ್ಷ್ಯ ತೋರಿದ್ದು, ಈ ತಕ್ಷಣ ಬೆಳೆ ಹಾನಿ ಪರಿಹಾರ ಪಾವತಿಸಬೇಕು ಅದೇ ರೀತಿ ಮಂಡ್ಯ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.
ಸೇನೆಯ ರಾಜ್ಯ ಸಂಚಾಲಕ ಮಹಾಂತಪ್ಪ, ಬೆಟ್ಟಳ್ಳಿ ಮಂಜುನಾಥ್, ಸೌಭಾಗ್ಯ, ಪವಿತ್ರ, ಇಂದ್ರಮ್ಮ, ನಂದಿನಿ, ದೇವು, ಶಿವು, ಚಂದ್ರು, ಕುಮಾರ ಯರಹಳ್ಳಿ, ಮಧು ನೇತೃತ್ವ ವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments